ಬೆಂಗಳೂರು: ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಸಂಸ್ಥೆಗಳು ಸಾರ್ವಜನಿಕರಿಗೆ ನೀಡುತ್ತಿರುವ ಕಿರುಕುಳ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಇದಕ್ಕೆ ಕಡಿವಾಣ ಹಾಕಲು ನಿರ್ಧರಿಸಿರುವ ರಾಜ್ಯ ಸರ್ಕಾರ ಈ ನಿಟ್ಟಿನಲ್ಲಿ ಸುಗ್ರೀವಾಜ್ಞೆ ತರಲು ಗುರುವಾರ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ.
ಇಂದು ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಮೈಕ್ರೋಫೈನಾನ್ಸ್ ಸಂಸ್ಥೆಗಳನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಹೊಸದಾಗಿ ಜಾರಿಗೆ ತರುವ ಮಸೂದೆಗೆ ಒಪ್ಪಿಗೆ ನೀಡಲಾಗಿದೆ.
ಸಚಿವ ಸಂಪುಟ ಸಭೆ ಬಳಿಕ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಕಾನೂನು ಮತ್ತು ಸಂಸದೀಯ ಸಚಿವ ಎಚ್ಕೆ ಪಾಟೀಲ್ ಅವರು, ಫೈನಾನ್ಸ್ಗಳಿಗೆ ಕಡಿವಾಣ ಹಾಕಲು ಸುಗ್ರೀವಾಜ್ಞೆಗೆ ಸಚಿವ ಸಂಪುಟ ಒಪ್ಪಿಗೆ ಸೂಚಿಸಿದೆ ಎಂದರು.
ಅಮಾನವೀಯವಾಗಿ ಮೈಕ್ರೋ ಪೈನಾನ್ಸ್ನಿಂದ ಸಾಲ ವಸೂಲಿ ಆಗುತ್ತಿದೆ. ಇಂದು ಕೂಡ ಆತ್ಮಹತ್ಯೆ ಪ್ರಕರಣ ವರದಿಯಾಗಿದ್ದು, ಮಸೂದೆ ತರಲು ತೀರ್ಮಾನಿಸಿ ಕೆಲವು ತಾಂತ್ರಿಕ ಅಂಶಗಳ ಬಗ್ಗೆ ಚರ್ಚಿಸಿದ್ದೇವೆ. ಇಂದು ಸಂಜೆ 4 ಗಂಟೆಗೆ ಮುಖ್ಯಮಂತ್ರಿಗಳು ಹಿರಿಯ ಸಚಿವರ ಸಭೆ ಕರೆದಿದ್ದಾರೆ. ಕೆಲವು ಮಹತ್ವದ ವಿಚಾರ ಇರುವುದರಿಂದ ಸಭೆ ಮಾಡುತ್ತಿದ್ದೇವೆ. ಸಂಜೆ 4 ಗಂಟೆಗೆ ಮಸೂದೆಗೆ ಸ್ಪಷ್ಟ ಚಿತ್ರಣ ನೀಡುತ್ತೇವೆ ಎಂದು ತಿಳಿಸಿದರು.
ಸುಗ್ರೀವಾಜ್ಞೆ ತರಲು ಸಿಎಂಗೆ ಸಚಿವ ಸಂಪುಟ ಅಧಿಕಾರವನ್ನು ನೀಡಿದೆ. ಸಿಎಂ ಜೊತೆ ಸಭೆಯ ಬಳಿಕ ಕಾನೂನಾತ್ಮಕವಾಗಿ ತಿರ್ಮಾನ ಆಗಲಿದೆ. ಸಂಪುಟ ಸಭೆಯಲ್ಲಿ ಸಂಪೂರ್ಣ ಅಧಿಕಾರ ಸಿಎಂ ಅವರಿಗೆ ನೀಡಲಾಗಿದೆ. ನಮ್ಮಲ್ಲಿರುವ ಕಾನೂನುಗಳು ಕೆಲವು ಪ್ಲಸ್ ಆಗಲಿವೆ. ಕೆಲವು ಮೈನಸ್ ಆಗಲಿವೆ. ಹೀಗಾಗಿ ಕಾನೂನಾತ್ಮಕ ತೀರ್ಮಾನಕ್ಕೆ ಸಂಜೆ ಹಿರಿಯ ಸಚಿವರ ಸಭೆ ಕರೆಯಲಾಗಿದೆ ಎಂದು ಎಚ್ ಕೆ ಪಾಟೀಲ್ ಹೇಳಿದ್ದಾರೆ