ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಶ್ರೀಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯ ದೇಗುಲದ ವ್ಯವಸ್ಥಾಪನಾ ಆಡಳಿತ ಮಂಡಳಿ ಅಧ್ಯಕ್ಷನಾಗಿ ಮಾಜಿ ರೌಡಿಶೀಟರ್ ಹರೀಶ್ ಇಂಜಾಡಿ ನೇಮಕವಾಗಿದ್ದಾರೆ. ಈ ಅಧ್ಯಕ್ಷ ಸ್ಥಾನಕ್ಕೆ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಮತ್ತು MLC ಮಂಜುನಾಥ ಭಂಡಾರಿ ಕಾಂಗ್ರೆಸ್ ಮುಖಂಡ ಕಂ ಗ್ರಾಮ ಪಂಚಾಯಿತಿ ಸದಸ್ಯ ಹರೀಶ್ ಇಂಜಾಡಿ ಹೆಸರನ್ನು ಶಿಫಾರಸ್ಸು ಮಾಡಿದ್ದರು. ಆದರೆ ಹರೀಶ್ಗೆ ಅಧ್ಯಕ್ಷ ಸ್ಥಾನ ನೀಡಲು ಸುಬ್ರಹ್ಮಣ್ಯ ಗ್ರಾಮಸ್ಥರು ವಿರೋಧಿಸಿದ್ದರು.



ಕಾಂಗ್ರೆಸ್ ಮುಖಂಡ ಕಂ ಗ್ರಾಮ ಪಂಚಾಯಿತಿ ಸದಸ್ಯ ಹರೀಶ್ ಇಂಜಾಡಿ ಮೇಲೆ ಅನೇಕ ಆರೋಪಗಳು ಕೇಳಿಬಂದಿವೆ. ನಕಲಿ ಚೆಕ್ ನೀಡಿ ಹಣ್ಣು-ಕಾಯಿ ಟೆಂಡರ್ ಮಾಡಿ ದೇಗುಲ ಆಡಳಿತ ಮಂಡಳಿಗೆ ವಂಚನೆ ಮಾಡಿರುವ ಆರೋಪ ಇದೆ. ಇದೇ ಆರೋಪದಲ್ಲಿ ಅವರನ್ನು ಬಂಧಿಸಲಾಗಿತ್ತು.

ಅಲ್ಲದೇ ಮರಳು ಮಾಫಿಯಾ ಮತ್ತು ಮರ ಕಳ್ಳ ಸಾಗಾಣೆ ಆರೋಪಿಸಿ ದಾಖಲೆ ಸಮೇತ ಧಾರ್ಮಿಕ ದತ್ತಿ ಇಲಾಖೆ ಸಚಿವ ರಾಮಲಿಂಗಾರೆಡ್ಡಿಗೆ ಸುಬ್ರಹ್ಮಣ್ಯ ಗ್ರಾಮಸ್ಥರು ಪತ್ರ ಬರೆದಿದ್ದರು. ಆದರೆ ಗ್ರಾಮಸ್ಥರ ಮನವಿಗೂ ಕ್ಯಾರೆ ಎನ್ನದೇ ಹರೀಶ್ ಇಂಜಾಡಿ ನೇಮಕ ಮಾಡಲಾಗಿದೆ. ಆಡಳಿತ ಮಂಡಳಿ ಸದ್ಯಸ್ಯರಾಗಲು ಸಂಸ್ಥೆಯ ಹಿತಾಸಕ್ತಿಗೆ ವಿರುದ್ಧ ಇದ್ದವರು ಆಗಬಾರದು ಎನ್ನುವ ನಿಯಮ ಮೀರಿ ಆಯ್ಕೆ ಮಾಡಲಾಗಿದೆ ಎಂದು ಆರೋಪಿಸಲಾಗಿದೆ.
ಅಧ್ಯಕ್ಷರಾಗಿ ಹರೀಶ್ ಇಂಜಾಡಿ ಆಯ್ಕೆ ಬೆನ್ನಲ್ಲೇ ಆಕ್ರೋಶ ವ್ಯಕ್ತವಾಗಿದೆ. ಸಾಮಾಜಿಕ ತಾಣಗಳಲ್ಲಿ ಕಾಂಗ್ರೆಸ್ ವಿರುದ್ದ ಬಿಜೆಪಿ ಆಕ್ರೋಶ ಹೊರಹಾಕಿದೆ. ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆಯಾದಾಗ ರೌಡಿ ಶೀಟರ್ ಎಂದಿದ್ದ ಕಾಂಗ್ರೆಸ್. ರೌಡಿಶೀಟರ್ ಆದ ಕಾರಣ ಸುಹಾಸ್ ಮನೆಗೆ ಭೇಟಿ ನೀಡಲ್ಲ ಎಂದು ಪರಮೇಶ್ವರ್, ದಿನೇಶ್ ಗುಂಡೂರಾವ್ ಹೇಳಿದ್ದರು. ಆದರೆ ಇದೀಗ ಗುಂಡೂರಾವ್ ಶಿಫಾರಸ್ಸಿನಂತೆ ಮಾಜಿ ರೌಡಿಶೀಟರ್ಗೆ ಕುಕ್ಕೆ ಅಧ್ಯಕ್ಷ ಪಟ್ಟ ನೀಡಿದ್ದಾರೆ ಎಂದು ಬಿಜೆಪಿ ಕಾರ್ಯಕರ್ತರು ಕಿಡಿಕಾರಿದ್ದಾರೆ.
‘ರೌಡಿಶೀಟರ್ಗೆ ನಾಗ ಕ್ಷೇತ್ರ ರಾಜ್ಯದ ನಂ. 1 ದೇವಸ್ಥಾನ ಕುಕ್ಕೆ ಸುಬ್ರಹ್ಮಣ್ಯ ಸಮಿತಿ ಅಧ್ಯಕ್ಷ ಸ್ಥಾನ. ರೌಡಿ ಭಾಗ್ಯ’. ‘ರೌಡಿಶೀಟರ್ ಮನೆಗೆ ಭೇಟಿ ನೀಡಲ್ಲ ಎಂದು ಹೇಳುತ್ತಿದ್ದ ಸರ್ಕಾರ ಇಂದು ರೌಡಿ ಶೀಟರ್ಗೆ ಅಧ್ಯಕ್ಷ ಸ್ಥಾನ ಕೊಟ್ಟಿದೆ’. ‘ಇದಕ್ಕೂ ಮೊದಲು ಕುಕ್ಕೆ ದೇವಸ್ಥಾನಕ್ಕೆ ವಚನೆ ಮೋಸ ಮಾಡಿರುವ ಪ್ರಕರಣಗಳು ಇವರ ಮೇಲಿದೆ. ಇದೀಗ ಅಧ್ಯಕ್ಷ ಸ್ಥಾನ ಕೊಟ್ಟು ದೇವಸ್ಥಾನವನ್ನು ಏನು ಮಾಡುತ್ತಾರೆ ನೋಡಬೇಕು’ ಎಂದು ಆಕ್ರೋಶ ವ್ಯಕ್ತಪಡಿಸಲಾಗಿದೆ.