ಮಂಗಳೂರು : ಪ್ರಾಣಾಪಾಯದಲ್ಲಿರುವ ವ್ಯಕ್ತಿಯ ಜೀವ ಉಳಿಸಲು ನೆರವಾಗುವ ರಕ್ತದಾನ ಅತ್ಯಂತ ಶ್ರೇಷ್ಠ ದಾನವಾಗಿದೆ. ವಿದ್ಯಾರ್ಥಿಗಳು ಕಾಲೇಜು ಜೀವನದಲ್ಲೇ ಸ್ವಯಂ ಪ್ರೇರಿತರಾಗಿ ರಕ್ತದಾನಕ್ಕೆ ಮುಂದಾಗಿರುವುದು ಭವಿಷ್ಯದಲ್ಲಿ ಇನ್ನಷ್ಟು ಮಾನವೀಯ ಸೇವಾ ಕಾರ್ಯಗಳಿಗೆ ಪ್ರೇರಣೆಯಾಗಲಿದೆ ಎಂದು ದ.ಕ.ಜಿಲ್ಲಾ ರೆಡ್ಕ್ರಾಸ್ ಸೊಸೈಟಿಯ ನಿರ್ದೇಶಕ ಪುಷ್ಪರಾಜ್ ಜೈನ್ ಹೇಳಿದರು.


ನಗರದ ರಥಬೀದಿಯ ಡಾ.ಪಿ.ದಯಾನಂದ ಪೈ -ಡಾ.ಪಿ.ಸತೀಶ್ ಪೈ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ವತಿಯಿಂದ ದ.ಕ.ಜಿಲ್ಲಾರೆಡ್ಕ್ರಾಸ್ ಸೊಸೈಟಿ ಮತ್ತು ಕಾಲೇಜಿನ ಹಿರಿಯ ವಿದ್ಯಾರ್ಥಿ ಸಂಘದ ಸಹಯೋಗದಲ್ಲಿ ಶನಿವಾರ ನಡೆದ ರಕ್ತದಾನ ಶಿಬಿರವನ್ನು ಉದ್ಘಾಟಿಸಿ ಅವರು ಮಾತನಾಡಿದರು.


ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲ ಡಾ.ಜಯಪ್ರಕಾಶ್ ಭಂಡಾರಿ ಮಾತನಾಡಿ ” ಕಾಲೇಜಿನಲ್ಲಿ ಈ ಶೈಕ್ಷಣಿಕ ವರ್ಷದಲ್ಲಿ ೨ನೇ ಬಾರಿ ರಕ್ತದಾನ ಶಿಬಿರ ಆಯೋಜಿಸಿದ್ದು, ವಿದ್ಯಾರ್ಥಿಗಳು
ಸೇವಾ ಕಾರ್ಯಗಳಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದಾರೆ’ ಎಂದರು. ದ.ಕ.ಜಿಲ್ಲಾ ರೆಡ್ಕ್ರಾಸ್ ಸೊಸೈಟಿ ನಿರ್ದೇಶಕ ಪಿ.ಬಿ.ಹರೀಶ್ ರೈ, ಕಾರ್ಯದರ್ಶಿ ಕಿಶೋರ್ಚಂದ್ರ ಹೆಗ್ಡೆ ಮುಖ್ಯ ಅತಿಥಿಗಳಾಗಿದ್ದರು, ಕಾಲೇಜಿನ ಆಂತರಿಕ ಗುಣಮಟ್ಟ ಭರವಸೆ ಕೋಶದ ಸಂಯೋಜಕರಾದ ದೇವಿಪ್ರಸಾದ್, ಜ್ಯೋತಿ ಪ್ರಿಯಾ, ಯೂತ್ ರೆಡ್ಕ್ರಾಸ್ ಸಂಯೋಜಕರಾದ ಡಾ.ಅಶೋಕ್,ಸಿ,ಎಚ್., ಡಾ.ಜ್ಯೋತಿ.ಪಿ., ಮೈತ್ರಿ.ಬಿ., ವಿದ್ಯಾರ್ಥಿ ಸಂಯೋಜಕರಾದ ಕೌಶಿಕ್, ತೃಷಾ , ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ದೀಕ್ಷಿತ್ ಉಪಸ್ಥಿತರಿದ್ದರು.ವಿದ್ಯಾರ್ಥಿನಿ ಮನಿಷಾ ಕಾರ್ಯಕ್ರಮ ನಿರೂಪಿಸಿದರು.



