ಸುಳ್ಯ : ಮನೆಯ ಸಮೀಪದ ಕೆರೆಗೆ ಬಿದ್ದು ಅವಳಿ ಮಕ್ಕಳಿಬ್ಬರು ಮೃತಪಟ್ಟ ಹೃದಯವಿದ್ರಾವಕ ಘಟನೆ ಸುಳ್ಯ ತಾಲೂಕಿನ ಮುರುಳ್ಯ ಗ್ರಾಮದ ಕಡೀರದಲ್ಲಿ ನಡೆದಿದೆ.


ಕಡೀರ ನಿವಾಸಿ ಹಾಗೂ ವೆಲ್ಡಿಂಗ್ ಕೆಲಸ ಮಾಡುತ್ತಿದ್ದ ವಸಂತ ಅವರ ಪುತ್ರರಾದ ಯಶ್ವಿನ್ ಮತ್ತು ಜಶ್ವಿನ್ ಮೃತ ದುರ್ದೈವಿಗಳಾಗಿದ್ದಾರೆ. ಮನೆಯ ಸಮೀಪದ ಕೆರೆಯ ಬಳಿ ಆಟವಾಡುತ್ತಿದ್ದ ವೇಳೆ ಮಕ್ಕಳು ಆಕಸ್ಮಿಕವಾಗಿ ನೀರಿಗೆ ಬಿದ್ದಿದ್ದಾರೆ ಎಂದು ತಿಳಿದುಬಂದಿದೆ.

ವಿಷಯ ಗಮನಕ್ಕೆ ಬಂದ ತಕ್ಷಣ ಸ್ಥಳೀಯರು ಹುಡುಕಾಟ ನಡೆಸಿದ್ದು, ಬಳಿಕ ಇಬ್ಬರ ಮೃತದೇಹಗಳನ್ನು ಕೆರೆಯಿಂದ ಮೇಲಕ್ಕೆತ್ತಲಾಗಿದೆ. ಘಟನೆಯ ಸುದ್ದಿ ತಿಳಿಯುತ್ತಿದ್ದಂತೆ ಕುಟುಂಬಸ್ಥರ ಆಕ್ರಂದನ ಮುಗಿಲುಮುಟ್ಟಿದ್ದು, ಗ್ರಾಮದಲ್ಲಿ ಶೋಕದ ವಾತಾವರಣ ಆವರಿಸಿದೆ.

ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ. ಅವಳಿ ಮಕ್ಕಳ ಅಕಾಲಿಕ ನಿಧನದಿಂದ ಗ್ರಾಮಸ್ಥರು ತೀವ್ರ ದುಃಖ ವ್ಯಕ್ತಪಡಿಸಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.


