ಮಡಿಕೇರಿ: ಅರಣ್ಯ ಸಿಬ್ಬಂದಿ ಮೇಲೆ ಜೀಪ್ ಹತ್ತಿಸಲು ಯತ್ನಿಸಿದ ಕಳ್ಳ ಬೇಟೆಗಾರರ ​​ಮೇಲೆ ಫೈರಿಂಗ್..!

Prakhara News
1 Min Read

ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ನಡೆಸಿದ ಕಾರ್ಯಾಚರಣೆ ವೇಳೆ ಅರಣ್ಯ ಸಿಬ್ಬಂದಿಗಳ ಮೇಲೆಯೇ ಜೀಪ್ ಹತ್ತಿಸಲು ಯತ್ನಿಸಿದ ಆರೋಪದ ಮೇಲೆ ಆತ್ಮರಕ್ಷಣೆಗಾಗಿ ಸಿಬ್ಬಂದಿ ಗುಂಡು ಹಾರಿಸಿದ್ದು, ಇಬ್ಬರು ಕಳ್ಳ ಬೇಟೆಗಾರರು ಗಾಯಗೊಂಡಿದ್ದಾರೆ.

ಮಡಿಕೇರಿ ತಾಲೂಕಿನ ಬೆಟ್ಟತ್ತೂರು ಗ್ರಾಮದಲ್ಲಿ ಕಾಡುಕೋಣ ಬೇಟೆಯಾಡಿ ಜೀಪ್‌ನಲ್ಲಿ ಮಾಂಸ ಸಾಗಿಸುತ್ತಿದ್ದ ಇಬ್ಬರು ಕಳ್ಳಬೇಟೆಗಾರರನ್ನ ಅರಣ್ಯ ಇಲಾಖೆ ಸಿಬ್ಬಂದಿ ತಡೆದಿದ್ದಾರೆ. ಈ ವೇಳೆ ಆರೋಪಿಗಳು ಜೀಪನ್ನು ಅರಣ್ಯ ಸಿಬ್ಬಂದಿ ಮೇಲೆಯೇ ಹರಿಸಿ ಪರಾರಿಯಾಗಲು ಯತ್ನಿಸಿದರೆಂದು ತಿಳಿದುಬಂದಿದೆ. ಪರಿಸ್ಥಿತಿ ನಿಯಂತ್ರಿಸಲು ಮತ್ತು ಆತ್ಮರಕ್ಷಣೆಗಾಗಿ ಅರಣ್ಯ ಇಲಾಖೆ ಸಿಬ್ಬಂದಿ 3 ಸುತ್ತು ಗುಂಡು ಹಾರಿಸಿದ್ದಾರೆ. ಈ ವೇಳೆ ಜುಬೇರ್ ಹಾಗೂ ಯಾಕೂಬ್ ಎಂಬ ಇಬ್ಬರು ಆರೋಪಿಗಳಿಗೆ ಗುಂಡು ತಗುಲಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ತಕ್ಷಣ ಮಡಿಕೇರಿ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಿ ಬಳಿಕ ಮಂಗಳೂರು ಅಸ್ಪತ್ರೆ ಹೆಚ್ಚಿನ ಚಿಕಿತ್ಸೆಗಾಗಿ ರವಾನೆ ಮಾಡಲಾಗಿದೆ.

ಕಾರ್ಯಾಚರಣೆ ವೇಳೆ ಆರೋಪಿಗಳಿಂದ ಸುಮಾರು 266 ಕೆಜಿ ಕಾಡುಕೋಣದ ಮಾಂಸವನ್ನ ವಶಕ್ಕೆ ಪಡೆದಿದ್ದಾರೆ. ಕಳ್ಳಬೇಟೆಗೆ ಬಳಸಿದ್ದ ವಾಹನ ಹಾಗೂ ಇತರೆ ವಸ್ತುಗಳನ್ನೂ ವಶಪಡಿಸಿಕೊಳ್ಳಲಾಗಿದೆ. ಘಟನೆಗೆ ಸಂಬಂಧಿಸಿದಂತೆ ಅರಣ್ಯ ಇಲಾಖೆ ಅಧಿಕಾರಿಗಳು ಪ್ರಕರಣ ದಾಖಲಿಸಿಕೊಂಡಿದ್ದು, ಕಳ್ಳಬೇಟೆ ಜಾಲದ ಕುರಿತು ಹೆಚ್ಚಿನ ತನಿಖೆ ಮುಂದುವರಿದಿದೆ. ಕಳ್ಳಬೇಟೆಗಾರರ ವಿರುದ್ಧ ಅರಣ್ಯ ಇಲಾಖೆ ನಡೆಸಿದ ಈ ಕಾರ್ಯಾಚರಣೆ ಕೊಡಗಿನಲ್ಲಿ ಸಂಚಲನ ಮೂಡಿಸಿದೆ.

ಅರಣ್ಯ ಸಿಬ್ಬಂದಿ ಮೇಲೆಯೇ ವಾಹನ ಹರಿಸಲು ಯತ್ನಿಸಿದ ಆರೋಪದ ನಡುವೆಯೇ ನಡೆದ ಗುಂಡಿನ ದಾಳಿಯಲ್ಲಿ ಇಬ್ಬರು ಆರೋಪಿಗಳು ಗಾಯಗೊಂಡಿದ್ದು, ಪ್ರಕರಣದ ಕುರಿತು ಅರಣ್ಯ ಇಲಾಖೆ ಸಮಗ್ರ ತನಿಖೆ ಕೈಗೊಂಡಿದೆ.

Share This Article
Leave a Comment