ಬೆಳಗಾವಿ: ಶಿವಂ ಅಸೋಸಿಯೇಟ್ಸ್ ವಿರುದ್ಧದ ವಂಚನೆ ಪ್ರಕರಣಕ್ಕೆ ಇದೀಗ ಜಾರಿ ನಿರ್ದೇಶನಾಲಯ ಎಂಟ್ರಿಯಾಗಿದೆ. ದಾಳಿ ಬಳಿಕ ಇಡಿ ಬಿಡುಗಡೆ ಮಾಡಿರುವ ಪ್ರಕಟಣೆಯಲ್ಲಿ ಕಂಪನಿ ಮೂಲಕ ನಡೆದಿದೆ ಎನ್ನಲಾದ ಹಣಕಾಸು ವಂಚನೆಯ ಹಲವು ವಿವರಗಳು ಬಹಿರಂಗವಾಗಿವೆ.


ಬೆಳಗಾವಿ ಜಿಲ್ಲೆಯ ಮಾಳಮಾರುತಿ ಠಾಣೆಯಲ್ಲಿ ದಾಖಲಾಗಿದ್ದ ಎಫ್ಐಆರ್ ಆಧಾರದ ಮೇಲೆ ಇಡಿ ಅಧಿಕಾರಿಗಳು, ಶಿವಾನಂದ ಸಿದ್ದಪ್ಪ ನೀಲನ್ನವರ್ ಗೆ ಸೇರಿದ ಹಾಗೂ ಇತರ ಸಂಬಂಧಿತ ವ್ಯಕ್ತಿಗಳು, ಸಂಸ್ಥೆಗಳ ಮೇಲೆ ದಾಳಿ ಮಾಡಿ ತನಿಖೆ ಮಾಡಿದ್ದು, ಆರೋಪಿಗಳು ಹೆಚ್ಚಿನ ಸಂಖ್ಯೆಯ ಹೂಡಿಕೆದಾರರಿಂದ ದೊಡ್ಡ ಮೊತ್ತದ ಹಣ ಸಂಗ್ರಹಿಸಿದ್ದಾರೆ. ವ್ಯವಹಾರಿಕ, ವೈಯಕ್ತಿಕ ಮತ್ತು ಮಧ್ಯವರ್ತಿ ಖಾತೆಗಳ ಮೂಲಕ ಹಣದ ವ್ಯವಹಾರ ನಡೆದಿದೆ. ಷೇರು ದಲ್ಲಾಳಿಗಳು, FD ಖಾತೆಗಳು, ಸಂಬಂಧಿತ ವ್ಯಕ್ತಿಗಳು ಮತ್ತು ಇತರ ಫಲಾನುಭವಿಗಳಿಗೆ ಹಣ ವರ್ಗಾವಣೆ ಆಗಿರುವುದು ಕಂಡುಬಂದಿದೆ. ಈ ಬಗ್ಗೆ ಸ್ವತಃ ಇಡಿ ಪ್ರಕಟಣೆ ಮೂಲಕ ಮಾಹಿತಿ ನೀಡಿದೆ.

ಶಿವಾನಂದ ಸಿದ್ಧಪ್ಪ ನೀಲಣ್ಣವರ ಹಾಗೂ ಅವರ ಸಹಚರರು ಸಾರ್ವಜನಿಕರಿಗೆ ತಿಂಗಳಿಗೆ ಶೇ.3ರಷ್ಟು ಬಡ್ಡಿ ನೀಡುವುದಾಗಿ ನಂಬಿಸಿ ಒಟ್ಟು 2,110.97 ಕೋಟಿ ಠೇವಣಿ ಸಂಗ್ರಹಿಸಿದ್ದರು. ಆದರೆ, ಸಂಗ್ರಹಿಸಿದ ಮೊತ್ತದಲ್ಲಿ ಹೂಡಿಕೆದಾರರಿಗೆ ಕೇವಲ 333.89 ಕೋಟಿ ರೂಪಾಯಿ ಮಾತ್ರವೇ ಹಿಂದುರಿಗಿಸಿದ್ದಾರೆ. ಇನ್ನುಳಿದ 1,777.08 ಕೋಟಿ ಅಕ್ರಮ ಹಣದ ಸುಳಿವು ಪತ್ತೆಯಾಗಬೇಕಿದೆ. ಆರೋಪಿಗಳು ಸಾರ್ವಜನಿಕರನ್ನು ಸೆಳೆಯಲು ಮಧ್ಯವರ್ತಿಗಳಿಗೆ ಶೇ.0.5ರಷ್ಟು ಕಮಿಷನ್ ನೀಡುತ್ತಿದ್ದರು ಎಂಬ ಅಂಶವನ್ನೂ ಸಹ ಇಡಿ ಪ್ರಕಟಣೆಯಲ್ಲಿ ಉಲ್ಲೇಖಿಸಿದೆ.

ಹೂಡಿಕೆದಾರರಿಂದ ಸಂಗ್ರಹಿಸಿದ ಸಾರ್ವಜನಿಕರ ಹಣವನ್ನು ಷೇರು ಮಾರುಕಟ್ಟೆ, ಬ್ಯಾಂಕ್ ನಿಶ್ಚಿತ ಠೇವಣಿಗಳು, ರಿಯಲ್ ಎಸ್ಟೇಟ್ ಹಾಗೂ ನಿಕಟವರ್ತಿಗಳ ಖಾತೆಗಳಿಗೆ ಅಕ್ರಮವಾಗಿ ವರ್ಗಾಯಿಸಲಾಗಿತ್ತು. ಈ ಜಾಲದಲ್ಲಿ ಶಿವಂ ಅಸೋಸಿಯೇಟ್ಸ್, ಶಿವಾನಂದ ಸಿದ್ಧಪ್ಪ ನೀಲಣ್ಣವರ, ಸುಭಾಷ್ ರಾಮಗೌಡ ನಂದರಗಿ, ಮಹೇಶ್ ಎಸ್.ನೀಲಣ್ಣವರ, ಶಿವಂ ಪ್ರೊಡಕ್ಷನ್ಸ್, ಶಿವಂ ಲೈಫ್ಲೈನ್ ಪ್ರೈವೇಟ್ ಲಿಮಿಟೆಡ್ ಮತ್ತು ಶಿವಂ ಸೇವಾ ಪ್ರೈವೇಟ್ ಲಿಮಿಟೆಡ್ ಸಂಸ್ಥೆಗಳು ಹಾಗೂ ವ್ಯಕ್ತಿಗಳು ನೇರವಾಗಿ ಭಾಗಿಯಾಗಿರುವುದು ಕಂಡುಬಂದಿದೆ. ದಾಳಿಯ ಸಂದರ್ಭದಲ್ಲಿ ಅಕ್ರಮ ಹಣಕಾಸು ವಹಿವಾಟು, ಬೇನಾಮಿ ಆಸ್ತಿ ಹೂಡಿಕೆ ಹಾಗೂ ಡಿಜಿಟಲ್ ಸಾಕ್ಷ್ಯಗಳೂ ಸೇರಿದಂತೆ ಹಲವಾರು ಮಹತ್ವದ ದಾಖಲೆಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಇಡಿ ಪ್ರಕಟಣೆಯಲ್ಲಿ ತಿಳಿಸಿದೆ.


