ಬಂಟ್ವಾಳ: ವ್ಯಕ್ತಿಯೊಬ್ಬರು ಇದ್ದಕ್ಕಿದ್ದಂತೆ ಅಸ್ವಸ್ಥಗೊಂಡಿದ್ದು ಈ ಸಂದರ್ಭ ರಾತ್ರಿ ಗಸ್ತು ಕರ್ತವ್ಯದಲ್ಲಿದ್ದ ಸಿಬ್ಬಂದಿ ರಕ್ಷಿಸಿದ ಘಟನೆ ಬಿ.ಸಿ. ರೋಡ್ ನ ಗೂಡಿನ ಬಳಿ ಗುರುವಾರ ರಾತ್ರಿ ಸಂಭವಿಸಿದೆ.


ಅಶ್ರಫ್ ಎಂಬುವವರಿಗೆ ಗುರುವಾರ ತಡರಾತ್ರಿ ತೀವ್ರ ಎದೆನೋವು ಮತ್ತು ಹೊಟ್ಟೆ ನೋನು ಕಾಣಿಸಿಕೊಂಡಿತ್ತು. ಈ ಸಂದರ್ಭ ಕುಟುಂಬಸ್ಥರು ಸಹಾಯಕ್ಕಾಗಿ ಕೂಗಿಕೊಂಡಿದ್ದಾರೆ. ಈ ಧ್ವನಿಯನ್ನು ಆಲಿಸಿದ ರಾತ್ರಿ ಗಸ್ತು ತಿರುಗುತ್ತಿದ್ದ ಬೀಟ್ ಸಿಬ್ಬಂದಿ ತಕ್ಷಣವೇ ಸ್ಥಳಕ್ಕೆ ಧಾವಿಸಿದ್ದಾರೆ.

ಅಶ್ರಫ್ ಅವರಿಗೆ ಲಘು ಹೃದಯಾಘಾತ ಸಂಭವಿಸಿರುವುದು ತಿಳಿದುಬಂದಿದ್ದು, ತಕ್ಷಣವೇ ಪ್ರಥಮ ಚಿಕಿತ್ಸೆ ನೀಡಿ, ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲು ನೆರವಾಗಿದ್ದಾರೆ.

ಬಂಟ್ವಾಳ ನಗರ ಪೊಲೀಸ್ ಠಾಣೆಯ ಕಾನ್ಸ್ಟೇಬಲ್ ವಿನೋದ್ ಮತ್ತು ಗೃಹರಕ್ಷಕ ದಳದ ಸಿಬ್ಬಂದಿ ಜಯಗಣೇಶ್ ಅವರ ಸಮಯಪ್ರಜ್ಞೆ ಹಾಗೂ ತುರ್ತು ಸ್ಪಂದನೆಗೆ ಸಾರ್ವಜನಿಕ ವಲಯದಲ್ಲಿ ವ್ಯಾಪಕ ಪ್ರಶಂಸೆ ವ್ಯಕ್ತವಾಗಿದೆ.


