ಮಂಗಳೂರಿನಲ್ಲಿ ಏಳು ವರ್ಷ ಪ್ರಾಯದ ಬಾಲಕಿ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಿದ್ದ ಮೂವರು ಪಾಪಿಗಳಿಗೆ ಗಲ್ಲು ಶಿಕ್ಷೆ ಖಾಯಂಗೊಳಿಸಿದ ಹೈಕೋರ್ಟ್

Prakhara News
1 Min Read

ಬೆಂಗಳೂರು : ಆಟ ಆಡುತ್ತಿದ್ದ 7 ವರ್ಷ ಪ್ರಾಯದ ಬಾಲಕಿಯನ್ನು ತಿಂಡಿ ಕೊಡಿಸುವ ನೆಪದಲ್ಲಿ ಕರೆದೊಯ್ದು ಸಾಮೂಹಿಕವಾಗಿ ಅತ್ಯಾಚಾರ ನಡೆಸಿ ಬಳಿಕ ಆಕೆಯನ್ನು ಕೊಲೆ ಮಾಡಿ ಚರಂಡಿಗೆ ಎಸೆದ ಮೂವರು ಪಾಪಿಗಳಿಗೆ ಸೆಷನ್ಸ್ ಕೋರ್ಟ್ ವಿಧಿಸಿದ್ದ ಗಲ್ಲು ಶಿಕ್ಷೆಯನ್ನು ಹೈಕೋರ್ಟ್ ಖಾಯಂಗೊಳಿಸಿದೆ.
ವಿಚಾರಣಾ ನ್ಯಾಯಾಲಯ ವಿಧಿಸಿದ್ದ ಗಲ್ಲು ಶಿಕ್ಷೆ ದೃಢೀಕರಿಸುವಂತೆ ಕೋರಿ ರಾಜ್ಯ ಸರ್ಕಾರ ಸಲ್ಲಿಸಿದ್ದ ಕ್ರಿಮಿನಲ್ ರೆಫರ್ಡ್ ಅರ್ಜಿ ಮತ್ತು ಶಿಕ್ಷೆ ರದ್ದುಪಡಿಸುವಂತೆ ಕೋರಿ ಅಪರಾಧಿಗಳಾದ ಮಧ್ಯಪ್ರದೇಶದ ಜಯಬನ್ ಆದಿವಾಸಿ ಅಲಿಯಾಸ್ ಜಯಸಿಂಗ್ ಮತ್ತು ಮುಖೇಶ್ ಸಿಂಗ್, ಜಾರ್ಖಂಡ್​ನ ಮನೀಶ್ ತಿರ್ಕಿ ಹಾಗೂ ಸೀತಾ ರಂತು ಲೋಹಾರ್ ಕ್ರಿಮಿನಲ್ ಮೇಲ್ಮನವಿ ಸಲ್ಲಿಸಿದ್ದರು.

ಈ ಅರ್ಜಿಗಳ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಚ್.ಪಿ.ಸಂದೇಶ್ ನೇತೃತ್ವದ ವಿಭಾಗೀಯ ನ್ಯಾಯಪೀಠ, ದಕ್ಷಿಣ ಕನ್ನಡ ಜಿಲ್ಲೆಯ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ (ಪೋಕ್ಸೊ) ವಿಧಿಸಿದ್ದ ಗಲ್ಲು ಶಿಕ್ಷೆಯನ್ನು ದೃಢೀಕರಿಸಿದೆ. ಅಂತೆಯೇ, ಶಿಕ್ಷೆ ರದ್ದು ಕೋರಿ ಅಪರಾಧಿಗಳು ಸಲ್ಲಿಸಿದ್ದ ಅರ್ಜಿಗಳನ್ನು ವಜಾಗೊಳಿಸಿದೆ.

ಏನಿದು ಪ್ರಕರಣ

ಆರೋಪಿಗಳು ಮಂಗಳೂರಿನ ವಾಮಂಜೂರು ಬಳಿಯ ಟೈಲ್ಸ್ ಕಾರ್ಖಾನೆಯಲ್ಲಿ ಕಾರ್ಮಿಕರಾಗಿದ್ದರು. ಅದೇ ಕಾರ್ಖಾನೆಯಲ್ಲಿ ಸೇವೆ ಸಲ್ಲಿಸುತ್ತಿದ್ದ ಮಹಿಳೆಯೊಬ್ಬರ ಪುತ್ರಿಯನ್ನು 2021ರ ನವೆಂಬರ್ 21ರಂದು, ಚಿಕ್ಕಿ ಕೊಡಿಸುವುದಾಗಿ ನಂಬಿಸಿ ತಮ್ಮ ಕೊಠಡಿಗೆ ಕರೆದೊಯ್ದಿದ್ದರು. ಒಬ್ಬ ಅರೋಪಿ ಅಸಹಜ ಲೈಂಗಿಕ ಕ್ರಿಯೆ ನಡೆಸಿದ್ದರೆ, ಇನ್ನಿಬ್ಬರು ಅತ್ಯಾಚಾರ ಎಸಗಿದ್ದರು. ನಂತರ ಆಕೆಯ ಕುತ್ತಿಗೆ ಹಿಸುಕಿ ಸಾಯಿಸಿದ್ದರು. ಬಳಿಕ ಸಾಕ್ಷ್ಯ ನಾಶಪಡಿಸುವ ಉದ್ದೇಶದಿಂದ ಮೃತದೇಹವನ್ನು ಚರಂಡಿಗೆ ಎಸೆದಿದ್ದರು. ಮೃತದೇಹ ಪತ್ತೆಯಾದ ಬಳಿಕ ಸಂತ್ರಸ್ತೆಯ ತಾಯಿ ಪೊಲೀಸರಿಗೆ ದೂರು ನೀಡಿದ್ದರು. ವಿಚಾರಣೆ ನಡೆಸಿದ್ದ ನ್ಯಾಯಾಲಯ ಆರೋಪಿಗಳಿಗೆ ಗಲ್ಲು ಶಿಕ್ಷೆ ಜೊತೆಗೆ, ತಲಾ ₹40 ಸಾವಿರ ದಂಡ ವಿಧಿಸಿ ಆದೇಶಿಸಿತ್ತು.

Share This Article
Leave a Comment