ಪುತ್ತೂರು : ಪುತ್ತೂರಿನಲ್ಲಿ ಮಹಿಳೆಯ ಮೇಲೆ ಹಲ್ಲೆ ಹಾಗೂ ಪೊಲೀಸ್ ವಾಹನದ ಮೇಲೆ ಪುಂಡರು ದಾಳಿ ನಡೆಸಿದ ಘಟನೆಗೆ ಸಂಬಂಧಿಸಿದಂತೆ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ರಾಜ್ಯ ಸರ್ಕಾರ ಹಾಗೂ ಗೃಹ ಇಲಾಖೆಯ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.


ಘಟನೆ ಕುರಿತು ಪ್ರತಿಕ್ರಿಯಿಸಿದ ಸಂಸದರು, “ನಾನು ಸೈನಿಕನಾಗಿ ಕೆಲಸ ಮಾಡಿದವನು. ಇವತ್ತು ಪುತ್ತೂರಿನಲ್ಲಿ ಪೊಲೀಸ್ ಇಲಾಖೆಯ ಬಗ್ಗೆ ಯಾವುದೇ ಭಯವಿಲ್ಲದ ವಾತಾವರಣ ನಿರ್ಮಾಣವಾಗಿದೆ. ಪೊಲೀಸ್ ವಾಹನದಲ್ಲಿ ಮಹಿಳೆಯನ್ನು ಕುಳ್ಳಿರಿಸಿರುವಾಗ 50ಕ್ಕೂ ಹೆಚ್ಚು ಜನರು ಬಂದು ಎಳೆದಾಡುವುದು, ಕರ್ತವ್ಯಕ್ಕೆ ಅಡ್ಡಿಪಡಿಸುವುದನ್ನು ನೋಡಿದರೆ ರಾಜ್ಯದಲ್ಲಿ ಗೃಹ ಇಲಾಖೆ ಇದೆಯಾ ಅಥವಾ ಸತ್ತಿದೆಯಾ ಎನ್ನುವ ಪ್ರಶ್ನೆ ಮೂಡುತ್ತಿದೆ” ಎಂದು ಆಕ್ರೋಶ ಹೊರಹಾಕಿದರು.

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರವಿದೆ ಎಂಬ ಕಾರಣಕ್ಕೆ ಏನು ಬೇಕಾದರೂ ಮಾಡಬಹುದು ಎಂಬ ಭ್ರಮೆಯಲ್ಲಿ ಕೆಲವು ಕೀಳು ಮಾನಸಿಕತೆಯ ವ್ಯಕ್ತಿಗಳಿದ್ದಾರೆ. ಸರ್ಕಾರಗಳು ಬದಲಾಗಬಹುದು, ಆದರೆ ದೇಶದ ಸಂವಿಧಾನ ಮತ್ತು ಕಾನೂನು ಒಂದೇ ಆಗಿರುತ್ತದೆ. ಈ ನೆಲೆದ ಕಾನೂನಿಗೆ ಪ್ರತಿಯೊಬ್ಬರೂ ಗೌರವ ನೀಡಬೇಕು” ಎಂದು ಎಚ್ಚರಿಸಿದರು.

ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದವರ ಹಾಗೂ ಜೀಪ್ನಲ್ಲಿದ್ದ ವ್ಯಕ್ತಿ ಹಾಗೂ ಮಹಿಳೆಯ ಮೇಲೆ ಹಲ್ಲೆಗೆ ಯತ್ನಿಸಿದವರ ವಿರುದ್ಧ ತಕ್ಷಣವೇ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಗೃಹ ಸಚಿವರಿಗೆ ಹಾಗೂ ಪೊಲೀಸ್ ಇಲಾಖೆಗೆ ಆಗ್ರಹಿಸಿದರು. ದಕ್ಷಿಣ ಕನ್ನಡ ಮತ್ತು ಪುತ್ತೂರಿನ ಸಂಸ್ಕೃತಿಗೆ ಧಕ್ಕೆ ತರುವಂತಹ ಕೃತ್ಯಗಳನ್ನು ಭಾರತೀಯ ಜನತಾ ಪಾರ್ಟಿ ಹಾಗೂ ನಾವು ಯಾವುದೇ ಕಾರಣಕ್ಕೂ ಸಹಿಸುವುದಿಲ್ಲ ಎಂದು ಸ್ಪಷ್ಟಪಡಿಸಿದರು.


