ಉಡುಪಿ: ಹಾಡುಹಗಲೇ ಮನೆಗೆ ನುಗ್ಗಿ ಲಕ್ಷಾಂತರ ರೂ. ಮೌಲ್ಯದ ನಗ ನಗದು ಕಳವುಗೈದ ಪ್ರಕರಣಕ್ಕೆ ಸಂಬಂಧಿಸಿ ಕ್ಷಿಪ್ರ ಕಾರ್ಯಾಚರಣೆ ನಡೆಸಿದ ಮಣಿಪಾಲ ಪೊಲೀಸರು, 12ಗಂಟೆಯೊಳಗೆ ಪ್ರಕರಣ ಬೇಧಿಸಿ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.


ಬಂಧಿತರನ್ನು ಆರೋಪಿಗಳಾದ ವಿಜಯಪುರ ಮೂಲದ ಸಂತೋಷ (20), ಬಡನಿಡಿಯೂರು ನಿವಾಸಿ ಚಿರಂತನ್ (21) ಹಾಗೂ ಇಬ್ಬರು ಅಪ್ರಾಪ್ತ ಬಾಲಕರು ಎಂದು ಗುರುತಿಸಲಾಗಿದೆ.

ಬಡಗಬೆಟ್ಟು ಗ್ರಾಮದ ಶಾಂತಿನಗರದ ನಿವಾಸಿ ಸಂಗೀತಾ ಮಡಿವಾಳ ಅವರು ಮಾರ್ಚ್ 12ರಂದು ಬೆಳಗ್ಗೆ ಮನೆಗೆ ಬೀಗ ಹಾಕಿ ತಾಯಿ ಮನೆಗೆ ಹೋಗಿದ್ದರು. ಮಧ್ಯಾಹ್ನ ಬಂದು ನೋಡಿದಾಗ ಮನೆಯ ಹಂಚು ತೆಗೆದು ಒಳಪ್ರವೇಶಿಸಿದ್ದ ಕಳ್ಳರು ಕಪಾಟಿನಲ್ಲಿದ್ದ ಚಿನ್ನ, ಬೆಳ್ಳಿ ಹಾಗೂ ನಗದು ಕಳವು ಮಾಡಿದ್ದಾಗಿ ಮಣಿಪಾಲ ಠಾಣೆಗೆ ದೂರು ನೀಡಿದ್ದರು. ಪ್ರಕರಣ ದಾಖಲಿಸಿ, ಕಳ್ಳರ ಪತ್ತೆಗೆ ಪೊಲೀಸರು ವಿಶೇಷ ತಂಡ ರಚಿಸಿದ್ದರು. ಮಾ.13ರಂದು ಶೀಂಬ್ರಾ ಸೇತುವೆ ಬಳಿ ಅನುಮಾನಾಸ್ಪದವಾಗಿ ನಿಂತಿದ್ದ ಆರೋಪಿಗಳನ್ನು ಬಂಧಿಸಿ, ಚಿನ್ನಾಭರಣಗಳನ್ನು ವಶಪಡಿಸಿಕೊಂಡಿದ್ದಾರೆ. ಬಂಧಿತರಿಂದ 4,47,000 ರೂ.ಮೌಲ್ಯದ ಚಿನ್ನಾಭರಣಗಳನ್ನು ವಶಪಡಿಸಿಕೊಳ್ಳಲಾಗಿದೆ.



