ಉಡುಪಿ : ಮುದರಂಗಡಿ ಡೇವಿಡ್ ಡಿಸೋಜಾ ಕೊಲೆ ಪ್ರಕರಣ,ಮುಂಬೈ ನಟೋರಿಯಸ್ ಗ್ಯಾಂಗ್‌ಸ್ಟರ್ ಅನುಜ್ ಪಾಟೀಲ್ ಕಾಲಿಗೆ ಗುಂಡೇಟು, ಆರೋಪಿ ಅರೆಸ್ಟ್..!

Prakhara News
1 Min Read

ಉಡುಪಿ : ಕಾಪು ತಾಲೂಕಿನ ಮುದರಂಗಡಿಯಲ್ಲಿ ನಡೆದ ಡೇವಿಡ್ ಡಿಸೋಜಾ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿ, ಮುಂಬೈನ ನಟೋರಿಯಸ್ ಗ್ಯಾಂಗ್‌ಸ್ಟರ್ ಅನುಜ್ ಪಾಟೀಲ್‌ನನ್ನು ಪೊಲೀಸರು ಬಂಧಿಸಿದ್ದಾರೆ.

ಆಗಸ್ಟ್ 7ರಂದು ಮುದರಂಗಡಿಯ ಸೈಂಟ್ ಕ್ಷೇವಿಯರ್ ಚರ್ಚ್ ಕಾಂಪ್ಲೆಕ್ಸ್‌ನಲ್ಲಿ ಪ್ರಿನ್ಸ್ ಎಂಟರ್‌ಪ್ರೈಸಸ್ ಮಾಲೀಕ ಡೇವಿಡ್ ಡಿಸೋಜಾ ಅವರ ತಲೆಗೆ ಪಿಸ್ತೂಲ್‌ನಿಂದ ಗುಂಡು ಹಾರಿಸಿ ಹತ್ಯೆ ಮಾಡಲಾಗಿತ್ತು. ಪ್ರಕರಣದ ತನಿಖೆ ನಡೆಸುತ್ತಿದ್ದ ಕುಂದಾಪುರ ಹಾಗೂ ಕೊಲ್ಲೂರು ಠಾಣೆ ಪೊಲೀಸರ ತಂಡ ಇಂದು ಬೆಳಗ್ಗೆ ಹೆಬ್ರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅನುಜ್ ಪಾಟೀಲ್‌ನನ್ನು ವಶಕ್ಕೆ ಪಡೆದಿದೆ.

ಆರೋಪಿಯನ್ನು ಕರೆತರುತ್ತಿದ್ದ ವೇಳೆ ಆತ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿ, ಕೊಲ್ಲೂರು ಠಾಣೆ ಪಿಎಸ್ಐ ವಿನಯ್ ಅವರ ಆಯುಧವನ್ನು ಕಸಿದುಕೊಂಡು ಗುಂಡು ಹಾರಿಸಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ವೇಳೆ ಆತ್ಮರಕ್ಷಣೆಗಾಗಿ ಕುಂದಾಪುರ ಪಿಎಸ್ಐ ನಂಜ ನಾಯಕ್ ಆರೋಪಿಯ ಕಾಲಿಗೆ ಗುಂಡು ಹಾರಿಸಿದ್ದಾರೆ. ಗಾಯಗೊಂಡ ಅನುಜ್ ಪಾಟೀಲ್‌ನನ್ನು ಉಡುಪಿ ಅಜ್ಜರಕಾಡು ಆಸ್ಪತ್ರೆಗೆ ದಾಖಲಿಸಲಾಗಿದೆ.

ಪೊಲೀಸರ ಮಾಹಿತಿ ಪ್ರಕಾರ, ಅನುಜ್ ಪಾಟೀಲ್ ವಿರುದ್ಧ ಮಹಾರಾಷ್ಟ್ರ ಸೇರಿದಂತೆ ವಿವಿಧ ರಾಜ್ಯಗಳಲ್ಲಿ ಒಟ್ಟು 11 ಪ್ರಕರಣಗಳು ದಾಖಲಾಗಿವೆ. ಮಹಾರಾಷ್ಟ್ರದಲ್ಲಿ ಆತನ ವಿರುದ್ಧ MCOCA ಕಾಯ್ದೆಯಡಿ ಪ್ರಕರಣವೂ ದಾಖಲಾಗಿದೆ.
ಡೇವಿಡ್ ಡಿಸೋಜಾ ಕೊಲೆ ಪ್ರಕರಣದ ಹಿಂದೆ ಇರುವ ಕಾರಣ, ಇತರ ಆರೋಪಿಗಳ ಸಂಪರ್ಕ ಹಾಗೂ ಕೊಲೆಗೆ ಬಳಸಿದ ಶಸ್ತ್ರಾಸ್ತ್ರದ ಬಗ್ಗೆ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

Share This Article
Leave a Comment