ಉಡುಪಿ: ಮಲ್ಪೆ ಮೀನುಗಾರಿಕಾ ಬಂದರಿನಲ್ಲಿ ಮೀನು ಕಾರ್ಮಿಕನೊಬ್ಬನನ್ನು ಕೊಲೆಗೈದ ಘಟನೆ ಇಂದು ಮುಂಜಾನೆ ನಡೆದಿದೆ.


ಮೃತ ಯುವಕನನ್ನು ಮೀನು ಕಾರ್ಮಿಕ ಅಭಿಷೇಕ್ ಎಂದು ಗುರುತಿಸಲಾಗಿದೆ. ಬೋಟ್ನಲ್ಲಿ ಕ್ಷುಲ್ಲಕ ಕಾರಣಕ್ಕೆ ಉಂಟಾದ ಗಲಾಟೆ ವಿಕೋಪಕ್ಕೆ ತಿರುಗಿ, ಸಹ ಮೀನು ಕಾರ್ಮಿಕನೊಬ್ಬ ಅಭಿಷೇಕ್ನನ್ನು ಕೊಲೆ ಮಾಡಿದ್ದಾನೆ ಎನ್ನಲಾಗಿದೆ.

ಪ್ರಕರಣಕ್ಕೆ ಸಂಬಂಧಿಸಿ ಚಿಕ್ಕಮಗಳೂರು ಮೂಲದ, ಮಲ್ಪೆಯಲ್ಲಿ ಮೀನು ಕಾರ್ಮಿಕನಾಗಿ ಕೆಲಸ ಮಾಡುತ್ತಿದ್ದ ಯುವಕನನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ವಿಚಾರಣೆಯ ದೃಷ್ಟಿಯಿಂದ ವಶಕ್ಕೆ ಪಡೆದಿರುವ ಯುವಕನ ಹೆಸರನ್ನು ಪೊಲೀಸರು ಬಹಿರಂಗಪಡಿಸಿಲ್ಲ. ಘಟನಾ ಸ್ಥಳಕ್ಕೆ ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್ ಹಾಗೂ ಮಲ್ಪೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಕೊಲೆಗೆ ನಿಖರ ಕಾರಣ ಹಾಗೂ ಘಟನೆಯ ಸಂಪೂರ್ಣ ವಿವರಗಳನ್ನು ಪೊಲೀಸರು ತನಿಖೆ ನಡೆಸುತ್ತಿದ್ದು, ವಿಚಾರಣೆ ಮುಂದುವರಿದಿದೆ.


